ಸುದ್ದಿವಿಜಯ, ಜಗಳೂರು: ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಹೊರಗುತ್ತಿಗೆ ಡಿ-ಗ್ರೂಪ್ ನೌಕರರ ಸಂಘದಿಂದ ಶಾಸಕ ಬಿ. ದೇವೇಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಶಾಸಕರ ಕಚೇರಿಯಲ್ಲಿ ಭೇಟಿ ನೀಡಿ ಮನವಿ ಸಲ್ಲಿಸಿದ ನೌಕರರು ವಸತಿ ಶಿಕ್ಷಣ ಸಂಸ್ಥೆಗಳಡಿಯಲ್ಲಿ ಬರುವ ಇಂದಿರಾಗಾಂಧಿ, ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್ ಅಂಬೇಡ್ಕರ್, ಅಟಲ್ ಬಿಹಾರ್ ವಾಜಪೇಯಿ ವಸತಿ ಶಾಲೆ ಸೇರಿದಂತೆ ಎಲ್ಲಾ ವಸತಿ ಶಾಲೆಗಳು ಸರಕಾರದಿಂದ ಮಂಜೂರಾಗಿದ್ದು,
ಈಗಾಗಲೇ ಸುಮಾರು ವರ್ಷಗಳಿಂದಲೂ ಹೊರಗುತ್ತಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಖಾಲಿ ಇರುವ ಡಿ ಗ್ರೂಪ್ ಹುದ್ದೆಗಳಲ್ಲಿ ಮುಖ್ಯ ಅಡುಗೆಯವರಾಗಿ, ಸಹಾಯಕರು, ಕಾವಲುಗಾರ, ಜವಾನ, ಸ್ವಚ್ಛತಾ ಸಿಬ್ಬಂದಿಗಳನ್ನಾಗಿ ನೇಮಕ ಮಾಡಿಕೊಂಡು ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು.

ಸಂಸ್ಥೆಗಳಲ್ಲಿ 15ರಿಂದ 20 ವರ್ಷಗಳಿಂದ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧವಾಗಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಿಂದಲೂ ಹೋರಾಟ, ಪ್ರತಿಭಟನೆಯ ಮೂಲಕ ಸರಕಾರದ ಗಮನಕ್ಕೆ ತರಲಾಗಿತ್ತು.
ಆದರೆ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಹೊಸದಾಗಿ ಬಂದಿರುವ ಕಾಂಗ್ರೆಸ್ ಸರಕಾರ ಕೂಡ ಬಡವರು, ದೀನ, ದಲಿತರು, ನೊಂದವರ ಪರವಾಗಿ ಇದೆ ಎಂಬ ನಂಬಿಕೆಯಿಂದ ಸರಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ. ಸಿ.ಎಂ ಸಿದ್ದರಾಮಯ್ಯನವರು, ಸಚಿವರುಗಳು ಗಮನಹರಿಸಿ ನಮಗೆ ನ್ಯಾಯ ಒದಗಿಸಬೇಕು ಎಂದು ಹೋರಾಟನಿರತ ನೌಕಕರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಹೊರಗುತ್ತಿಗೆ ಡಿ-ಗ್ರೂಪ್ ನೌಕರರ ಸಂಘದ ಜೆ.ಕೆ ಸಂತೋಷ್, ಮಣಿಕಂಠ, ದುರುಗೇಶ್, ಶೇಖರಪ್ಪ, ನಾಗರಾಜ್, ಸಮೀನಾಭಾನು, ಆದರ್ಶ, ಜಲೀಲ್, ಯಲ್ಲಪ್ಪ, ಮೂರ್ತಿ, ತಿಪ್ಪೇಸ್ವಾಮಿ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ ಸೇರಿದಂತೆ ಮತ್ತಿತರಿದ್ದರು.