ಸುದ್ದಿವಿಜಯ,ಜಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿಗೂ ಹೆಚ್ಚು ಹಣ ನೀಡಿದ್ದು ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಾನು ಸದಾ ಕಂಕಣ ಬದ್ಧನಾಗಿ ದುಡಿಯುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಸಾರ್ವಜನಿಕರಿಗೆ ಭರವಸೆ ನೀಡಿದರು.
ಪಟ್ಟಣದ ಬಯಲು ರಂಗ ಮಂದಿರದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ಷೇತ್ರದ ಕಾನಮಡುಗು ಸಂಪರ್ಕ ಕಲ್ಪಿಸುವ ಉದ್ದಗಟ್ಟ ಸೇತುವೆ ನಿರ್ಮಾಣಕ್ಕೆ 5 ಕೋಟಿ ರೂ,
ಮೂಡಲ ಮಾಚೀಕೆರೆ ಸಮೀಪದ ಜಿನಿಗಿ ಹಳ್ಳಕ್ಕೆ ಅಡ್ಡಲಾಗಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ 5 ಕೋಟಿ ರೂ. ಮತ್ತು ಪಟ್ಟಣದ ಹಳೇ ತಾಲೂಕು ಕಚೇರಿಯನ್ನು ನೆಲಸಮ ಮಾಡಿ ತಾಲೂಕು ಆಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ.
ಅಷ್ಟೇ ಅಲ್ಲ ದುರಸ್ತಿಯಲ್ಲಿರುವ ಶಾಲಾ ಕಟ್ಟಡಗಳ ಅಭಿವೃದ್ಧಿಗೆ ಮುಂದಿನ ಶೈಕ್ಷಣಿಕ ವರ್ಷ ಮುಗಿಯುವುದರೊಳಗೆ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಪಡಿಸಲಾಗುವುದು.
ಅಷ್ಟೇ ಅಲ್ಲ ಸುಗಮ ಸಂಚಾರ ನಿರ್ವಹಣೆಗಾಗಿ ಮುಖ್ಯ ರಸ್ತೆ ವಿಸ್ತರಣೆ ಎಲ್ಲರೂ ಸಹಕಾರ ನೀಡಬೇಕು. ಶಿಕ್ಷಣ, ಆರೋಗ್ಯ ಮತ್ತು ಆಹಾರ ಇವು ನನ್ನ ಮೊದಲ ಆಧ್ಯತೆಯಾಗಿದೆ ಎಂದರು.
ಕ್ಷೇತ್ರದಲ್ಲಿ ಕುಡಿಯುವ ನೀರಿನ ಹಾಹಾಕಾರ ನೀಗಿಸಲು ಸಮರ್ಪಕ ಅನುದಾನ ಬಿಡುಗಡೆಗೂ ನಮ್ಮ ಸರಕಾರ ಸಿದ್ಧವಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ಐದು ಗ್ಯಾರಂಟಿಗಳನ್ನು ಕೊಡುವ ಮೂಲಕ ಬರ ಪರಿಸ್ಥಿತಿಯನ್ನು ಮರೆ ಮಾಡುವಂತ ಯೋಜನೆಗಳು ಜನರಿಗೆ ಸಹಕಾರಿಯಾಗಿವೆ.
ಸರಕಾರದ ಮುಂದೆ ಸಾಕಷ್ಟು ಸವಾಲುಗಳಿವೆ. ರಾಜ್ಯದ ಜನತೆಯ ಅಭಿವೃದ್ಧಿಗೆ ಶಕ್ತಿಯಾಗಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೆಲಸ ಮಾಡುತ್ತಿದೆ.
ತಾಲೂಕಿನಲ್ಲಿ ಅನೇಕ ಮೂಲ ಭೂತ ಸಮಸ್ಯೆಗಳಿವೆ. ಸರಕಾರದ ಮಾರ್ಗ ಸೂಚಿಯಂತೆ ಸ್ಥಳೀಯಯ ಸಮಸ್ಯೆಗಳನ್ನು ಅರಿತು ಕಂಕಣ ಬದ್ಧವಾಗಿ ಕೆಲಸ ಮಾಡಲು ಎಲ್ಲ ಅಧಿಕಾರಿಗಳು ಕೈಜೋಡಿಸಿ ಎಂದು ಮನವಿ ಮಾಡಿದವರು.
ತಹಶೀಲ್ದಾರ್ ಸೈಯದ್ ಕಲೀಂಉಲ್ಲಾ ಮಾತನಾಡಿ, ಗಣರಾಜ್ಯೋತ್ಸವದ ಈ ಸುಸಂದರ್ಭದಲ್ಲಿ ಭಾರತೀಯ ಪ್ರಜೆಗಳಾದ ನಾವು ಅಂಬೇಡ್ಕರ್ ಹಾಕಿ ಕೊಟ್ಟ ಸಂವಿಧಾನದ ಅಡಿಯಲ್ಲಿ ಭ್ರಾತೃತ್ವ, ಸಮಾನತೆ, ಏಕತೆ ಮತ್ತು ಕಾನೂನು ಪರಿಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಸಮಾನತೆಯಿಂದ ಬಾಳೋಣ ಎಂದರು.
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
ಧ್ವಜರೋಹಣ ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶಾಸಕ ಬಿ.ದೇವೇಂದ್ರಪ್ಪ ಸೇರಿದಂತೆ ಅನೇಕ ಮುಖಂಡರು ಮಾಲಾರ್ಪಣೆ ಮಾಡಿದರು.
![75ನೇ ಗಣ ರಾಜ್ಯೋತ್ಸವ ಹಿನ್ನೆಲೆ ಶಾಸಕ ಬಿ.ದೇವೇಂದ್ರಪ್ಪ ಮತ್ತು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.](http://suddivijaya.com/wp-content/uploads/2024/01/IMG_20240126_085818_545-scaled.jpg)
ನಂತರ ಹಾತ್ಮಾ ಗಾಂಧೀಜಿ ಮತ್ತು ಅಂಬೇಡ್ಕರ್ ಭಾವ ಚಿತ್ರ ಮೆರವಣಿಗೆಯೊಂದಿಗೆ ವಿವಿಧ ಶಾಲಾ ಮಕ್ಕಳ ಜೊತೆ ಪಥ ಸಂಚಲನದಲ್ಲಿ ಭಾಗವಹಿಸಿದರು. ಬಯಲು ರಂಗ ಮಂದಿರದವರೆಗೆ ಬೃಹತ್ ಮೆರವಣಿಗೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಮಕ್ಕಳು ದೇಶ ಭಕ್ತಿ ಗೀತಿಗಳಿಗೆ ನೃತ್ಯ ಮಾಡಿದರು.
ಈ ವೇಳೆ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಪಪಂ ಸದಸ್ಯ ರಮೇಶ್ರೆಡ್ಡಿ, ಎಂಎಲ್ಎ ತಿಪ್ಪೇಸ್ವಾಮಿ, ನಿರ್ಮಲಾ ಕುಮಾರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಚೀಫ್ ಆಫೀಸರ್ ಲೋಕ್ಯಾನಾಯ್ಕ್, ತಾಪಂ ಇಓ ಕೆ.ಟಿ.ಕರಿಬಸಪ್ಪ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಟಿ.ನಾಗರಾಜ್, ಬಿ.ಮಹೇಶ್ವರಪ್ಪ, ಕಲೇಶ್ರಾಜ್ ಪಟೇಲ್,
ಬಿಇಒ ಹಾಲಮೂರ್ತಿ, ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್ರಾವ್, ಪಪಂ ಸದಸ್ಯರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು.